
ನವದೆಹಲಿ, ಬುಧವಾರ, 6 ಜನವರಿ 2010: ಆಡಳಿತಾರೂಢ ಬಿಜೆಪಿಯಲ್ಲಿ ರೆಡ್ಡಿ ಬ್ರದರ್ಸ್ ಬಂಡಾಯದ ಕಹಳೆ ಮೊಳಗಿಸಿ ಶೋಭಾ ಕರಂದ್ಲಾಜೆ ಅವರ ತಲೆದಂಡ ತೆಗೆದುಕೊಳ್ಳುವ ಮೂಲಕ ಸಚಿವ ಸ್ಥಾನದಿಂದ ವಂಚಿತರನ್ನಾಗಿಸಲಾಗಿತ್ತು. ಆದರೆ ಇದೀಗ ಶೋಭಾ ಪ್ರಕರಣದ ಕುರಿತು ಪರಿಶೀಲನೆ ನಡೆಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದು, ಶೋಭಾ ಅವರನ್ನು ಮತ್ತೆ ಸಚಿವರನ್ನಾಗಿಸಲು ತೆರೆಮರೆಯ ಕಸರತ್ತು ನಡೆಯುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮಂಗಳವಾರ ಶೋಭಾ ಕರಂದ್ಲಾಜೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಗಡ್ಕರಿ ಅವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದರು. ಅಲ್ಲದೇ ಪಕ್ಷದಲ್ಲಿ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಬಲವಂತವಾಗಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಕೋರಿದ್ದರು ಎಂದು ಬಿಜೆಪಿ ಮೂಲ ತಿಳಿಸಿದೆ. ಮಾರ್ಚ್ ವೇಳೆಗೆ ಸಚಿವ ಸಂಪುಟ ಪುನಾರಚನೆ ಆಗುವುದು ಬಹುತೇಕ ಖಚಿತವಾಗಿದೆ. ಈ ಸಂದರ್ಭದಲ್ಲಿ ಕರಂದ್ಲಾಜೆ ಅವರು ಮತ್ತೆ ಸಚಿವರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಹುತೇಕರು ಶೋಭಾ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ರಾಷ್ಟ್ರೀಯ ನಾಯಕರಲ್ಲಿ ಇಂಗಿತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ.
source: webdunia
No comments:
Post a Comment