
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಸಾಮೂಹಿಕ ಹೊಣೆ ಹೊತ್ತುಕೊಳ್ಳಲು ಸಿದ್ಧ ಎಂದಿರುವ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಸೋನಿಯಾ ಗಾಂಧಿ ಕೃಪೆಯಿಂದ ಅಧ್ಯಕ್ಷನಾದ ನನ್ನನ್ನು ಬದಲಾವಣೆ ಮಾಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿದ್ದ ಅವರು, ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ನಿರ್ವಹಣೆ ತೋರಿಸಿರುವುದರ ಸಂಪೂರ್ಣ ಹೊಣೆ ಹೊತ್ತುಕೊಳ್ಳಲು ತಾನು ಸಿದ್ಧನಿದ್ದೇನೆ, ಇದು ಸಾಮೂಹಿಕ ಹೊಣೆಗಾರಿಕೆ ಎಂದರು.
ಹಲವು ದಿಕ್ಕುಗಳಿಂದ ಕೇಳಿ ಬರುತ್ತಿರುವ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರಿಂದ. ಹಾಗಾಗಿ ನಾಯಕತ್ವ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.
ಅದೇ ಹೊತ್ತಿಗೆ ಬಿಜೆಪಿ ಸರಕಾರವನ್ನು ಕೂಡ ದೇಶಪಾಂಡೆ ತರಾಟೆಗೆ ತೆಗೆದುಕೊಂಡರು.
ಬಿಬಿಎಂಪಿ ಚುನಾವಣೆ ಮುಗಿಯುತ್ತಿದ್ದಂತೆ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಇದು ಸರಕಾರದ ಅವಕಾಶವಾದಿತನವನ್ನು ತೋರಿಸುತ್ತದೆ ಎಂದಿರುವ ಅವರು, ಬಿಜೆಪಿ ತನ್ನ ಸಾಧನೆಗಳಿಂದಲೇ ಬಿಬಿಎಂಪಿಯಲ್ಲಿ ಗೆಲುವು ಸಾಧಿಸಿದೆ ಎಂಬ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರು.
No comments:
Post a Comment